ಉಡುಪಿ

ಉಡುಪಿ, udupi

ಮಂಗಳೂರು

ಮಂಗಳೂರು, mangaluru, mangalore

ರಾಜ್ಯ

ರಾಜ್ಯ

Breaking

Videos

ಧರ್ಮಸ್ಥಳ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲು: ದ.ಕ. ಜಿಲ್ಲಾ ಎಸ್ಪಿ ಅರುಣ್ ಕುಮಾರ್

 


ಮಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

ಈ ಹಿಂದೆಯೇ ಧರ್ಮಸ್ಥಳದಲ್ಲಿ ಹಲವು ಅಪರಾಧ ಕೃತ್ಯಗಳು ನಡೆದಿದೆ. ತನಗೆ ಜೀವ ಬೆದರಿಕೆ ಒಡ್ಡಿ ಈ ಕೃತ್ಯಗಳ ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿಸಿದ್ದಾರೆ. ಪ್ರಸಕ್ತ ತನಗೆ ಪಾಪಪ್ರಜ್ಞೆ ಕಾಡುತ್ತಿದೆ. ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ ಈ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಯನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ತಾನು ಸಿದ್ಧವಿರುವುದಾಗಿ ದೂರುದಾರರು ತಿಳಿಸಿದ್ದಾರೆ. ಗುರುವಾರ ತನ್ನ ಕಚೇರಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಈ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿದೆ. ದೂರುದಾರರು ತನ್ನ ಹೆಸರು ಮತ್ತು ಮಾಹಿತಿಯನ್ನು ಗೌಪ್ಯವಾಗಿಡುವಂತೆ ವಿನಂತಿಸಿಕೊಂಡ ಮೇರೆಗೆ ಅವರ ಬಗ್ಗೆ ಮಾಹಿತಿಯನ್ನು ನೀಡಲಾಗುವುದಿಲ್ಲ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

ಈ ದೂರಿನ ಬಗ್ಗೆ ನ್ಯಾಯಾಲಯದಿಂದ ಅಗತ್ಯ ಅನುಮತಿಯನ್ನು ಪಡೆದುಕೊಂಡು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ:39/2025, ಕಲಂ:211()ಬಿಎನ್‌ಎಸ್ ಕಾಯ್ದೆಯಡಿ ಗುರುವಾರ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಸ್ಥಗಿತಗೊಂಡ ನರ್ಮ್ ಪುನಾರಂಭಕ್ಕೆ ಯುವಮೋರ್ಚಾ ಮನವಿ

 


ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟದಿಂದ ಸಾವರ್ಜನಿಕರ ಪ್ರಶಂಸೆಗೂ ಪಾತ್ರವಾಗಿತ್ತು,ಆದರೆ ಪ್ರಸ್ತುತ ಆ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿರುತ್ತದೆ. ಸ್ಥಗಿತಗೊಳಿಸಲಾಗಿರುವ 13 ರೂಟ್ ಗಳ ಬಸ್ಸುಗಳ ಓಡಾಟವನ್ನು ಪುನರಾರಂಭಿಸುವುದು ತೀರಾ ಅಗತ್ಯವಾಗಿರುತ್ತದೆ. ಅಲ್ಲದೆ ಸದ್ರಿ 45 ಬಸ್ಸು ಗಳ ಮಂಜೂರಾತಿಯು 10 ವರ್ಷಗಳ ಹಿಂದಿನ ಸಮೀಕ್ಷೆಯಂತೆ ಆಗಿರುತ್ತದೆ, ಹೊಸ ಸಂಪರ್ಕ ರಸ್ತೆಗಳ ಅಭಿವೃದ್ಧಿ ಮತ್ತು ಪ್ರಸ್ತುತ ಪ್ರಯಾಣಿಕರ ಓಡಾಟದ ಸಂಖ್ಯೆಗೆ ಅನುಗುಣವಾಗಿ ಸದ್ರಿ ಬಸ್ಸುಗಳ ಸಂಖ್ಯೆಯನ್ನು ಕನಿಷ್ಠ 80 ನರ್ಮ್ ಬಸ್ಸುಗಳಿಗೆ ಹೆಚ್ಚಿಸಬೇಕೆಂದು ಆಗ್ರಹಿಸಲಾಗಿದೆ, ಹಾಗೂ ನಗರದಲ್ಲಿ ಕಾರ್ಯಾನಿರ್ವಹಿಸುತ್ತಿರುವ 32 ನರ್ಮ್ ಬಸ್ಸುಗಳು ತೀರಾ ಹಳೆಯದಾಗಿದ್ದು, ಮಾರ್ಗ ಮಧ್ಯೆ ಕೆಟ್ಟು ನಿಲ್ಲುವ ಘಟನಗಳೇ ಸಂಭವಿಸುತ್ತಿದೆ ಹಾಗೂ ಬಸ್ಸುಗಳಿಗೆ ಚಾಲಕರು ಮತ್ತು ನಿರ್ವಾಹಕರ ಕೊರತೆ ಇದ್ದು ಹುದ್ದೆ ಭರ್ತಿ ಮಾಡಬೇಕಾದ ಅನಿವಾರ್ಯತೆ ಇದೆ. ಸಮರ್ಪಕವಾದ ಬಸ್ ಸಂಚಾರ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು, ಸಾರ್ವಜನಿಕರು ಮತ್ತು ಕಾರ್ಮಿಕರು, ವಯೋವೃದ್ಧರು ಕಾಲ್ನಡಿಗೆಯಲ್ಲಿ ಓಡಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಉಡುಪಿ ನಗರ ಯುವಮೋರ್ಚಾ ಜಿಲ್ಲಾಧಿಕಾರಿಗಳಿಗೆ ಈ ಎಲ್ಲಾ ಸಮಸ್ಯೆಗಳನ್ನು ವಿವರಿಸಿ ಅತೀ ಶೀಘ್ರದಲ್ಲಿ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ಆಗ್ರಹಿಸಿದ್ದು, ನರ್ಮ್ ಬಸ್ಸು ಗಳ ಸೇವೆಯನ್ನು ಹೆಚ್ಚಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗೃವಾದ ಹೋರಾಟ ಕೈಗೆತ್ತಿಕೊಳ್ಳುವ ನಿರ್ಧಾರವನ್ನು ಮಾಡುವುದಾಗಿ ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಲಾಯಿತು.

 ಉಪಾಧ್ಯಕ್ಷರಾದ ಸಂದರ್ಶ ಆಚಾರ್ಯ, ಪ್ರಜ್ವಲ್ ಪೂಜಾರಿ, ಧನುಷ್ ಬಿ.ಕೆ., ಪ್ರಧಾನ ಕಾರ್ಯದರ್ಶಿಗಳಾದ ನಿತಿನ್ ಪೈ ಮಣಿಪಾಲ, ಶಿವಪ್ರಸಾದ್, ಕಾರ್ಯದರ್ಶಿಗಳಾದ ಧನುಷ್‌ ಕಡಿಯಾಳಿ, ಹರ್ಷರಾಜ್, ಆಕಾಂಶ್, ಭೂಷಣ್, ದೀಕ್ಷಿತ್ ಶೆಟ್ಟಿ, ರಮಿತ್ ಶೆಟ್ಟಿ, ತರುಣ್.

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ

 


ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.

ಸ್ವರೂಪ ಟಿ.ಕೆ. ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ. ವಿದ್ಯಾ ಕುಮಾರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ ಎಂದು ತಿಳಿದು ಬಂದಿದೆ

ಕೋಮು ಸಂಘರ್ಷ ನಿಗ್ರಹ ವಿಶೇಷ ಕಾರ್ಯಪಡೆ ವ್ಯಾಪ್ತಿಗೆ ಉಡುಪಿ ಜಿಲ್ಲೆ ಸೇರ್ಪಡೆ ಮೂಲಕ ರಾಜ್ಯ ಸರ್ಕಾರದಿಂದ ಬ್ರ್ಯಾಂಡ್ ಉಡುಪಿ ಘನತೆಗೆ ಧಕ್ಕೆ ತರುವ ಯತ್ನ : ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ


ಕರಾವಳಿ ಜಿಲ್ಲೆಯ ಕೋಮು ಸಂಘರ್ಷ ನಿಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಿರುವ ವಿಶೇಷ ಕಾರ್ಯ ಪಡೆಯ ವ್ಯಾಪ್ತಿಗೆ ಉಡುಪಿ ಜಿಲ್ಲೆಯನ್ನು ಸೇರ್ಪಡೆಗೊಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಉಡುಪಿ ಜಿಲ್ಲೆಯ ಘನತೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದು, ಈ ಕಾರ್ಯಪಡೆಯ ಮೂಲಕ ಉಡುಪಿ ಜಿಲ್ಲೆಯನ್ನು ಕೋಮು ಸೂಕ್ಷ್ಮ ಪ್ರದೇಶ ಎಂದು ಬಿಂಬಿಸಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯನ್ನು ಈ ಕಾರ್ಯಪಡೆಯ ವ್ಯಾಪ್ತಿಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕಳೆದ ಹಲವು ದಶಕಗಳಿಂದ ಯಾವುದೇ ಕೋಮು ಸಂಘರ್ಷದ ಘಟನೆಗಳು ಉಡುಪಿ ಜಿಲ್ಲೆಯಲ್ಲಿ ವರದಿಯಾಗದಿದ್ದರೂ, ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಅಭಿಪ್ರಾಯ ಸಲಹೆ ಪಡೆಯದೆ ಕಾನೂನು ಸುವ್ಯವಸ್ಥೆ ನಿಟ್ಟಿನಲ್ಲಿ ಯಾವುದೇ ಚರ್ಚೆ ನಡೆಸದೆ ಏಕಪಕ್ಷೀಯವಾಗಿ ಈ ಕಾರ್ಯಪಡೆಯನ್ನು ಉಡುಪಿ ಜಿಲ್ಲೆಯ ಜನತೆಯ ಮೇಲೆ ಹೇರಿದೆ. 

ರಾಜ್ಯ ಗೃಹ ಇಲಾಖೆಯ ವೈಫಲ್ಯವನ್ನು ಸರಕಾರವೇ ಈ ನಿರ್ಧಾರದಿಂದ ಒಪ್ಪಿಕೊಂಡಿದ್ದು, ರಾಜ್ಯದ 31 ಜಿಲ್ಲೆಗಳ ಪೈಕಿ ಕೇವಲ ಮೂರು ಜಿಲ್ಲೆಗಳನ್ನು ಕೋಮು ಸೂಕ್ಷ್ಮತೆಯ ನೆಪವೊಡ್ಡಿ ಈ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ತಮ್ಮಿಂದ ಸಾಧ್ಯವಾಗುತ್ತಿಲ್ಲ ಎಂದು ಪರೋಕ್ಷವಾಗಿ ರಾಷ್ಟ್ರಕ್ಕೆ ಸಂದೇಶ ನೀಡಿದಂತಾಗಿದೆ. 

ಬುದ್ಧಿವಂತರ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಉಡುಪಿ ನೆರೆಯ ಜಿಲ್ಲೆಗಳಲ್ಲಿ ಕೋಮು ಸಂಘರ್ಷದ ಘಟನೆಗಳು ನಡೆದಾಗಲು ಶಾಂತಿಯುತವಾಗಿದ್ದು, ತಮ್ಮ ಶಿಸ್ತು, ಸಂಯಮ, ಕಾನೂನು ಪಾಲನೆ ಹಾಗೂ ರಾಷ್ಟೀಯವಾದಿ ಚಿಂತನೆಯ ಮೂಲಕ ಕಾನೂನು ಸುವ್ಯವಸ್ಥೆಗೆ ಸದಾ ಸಹಕಾರ ನೀಡುವ ಜಿಲ್ಲೆಯ ಜನತೆಗೆ ರಾಜ್ಯ ಸರಕಾರ ಈ ಕಾರ್ಯ ಪಡೆಯನ್ನು ಹೇರುವ ಮೂಲಕ ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಳೆದಂತಾಗಿದೆ.

ಉಡುಪಿ ಜಿಲ್ಲೆ ರಾಷ್ಟ್ರಮಟ್ಟದಲ್ಲಿ ಗುಣ ಮಟ್ಟದ ಶಿಕ್ಷಣ ವ್ಯವಸ್ಥೆ, ಧಾರ್ಮಿಕ ಕೇಂದ್ರಗಳು, ಆರೋಗ್ಯ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬ್ರ್ಯಾಂಡ್ ಉಡುಪಿ ಯಾಗಿ ಗುರುತಿಸಿಕೊಂಡಿದ್ದು, ವಿವಿಧ ರಾಜ್ಯ ಹಾಗೂ ವಿವಿಧ ದೇಶಗಳ ಸಾವಿರಾರು ವಿದ್ಯಾರ್ಥಿಗಳು ಉಡುಪಿ ಜಿಲ್ಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.

ವಿಶೇಷ ಕಾರ್ಯಪಡೆಯ ಮೂಲಕ ಅತ್ಯಂತ ಶಾಂತಿಯುತವಾಗಿರುವ ಉಡುಪಿ ಜಿಲ್ಲೆಯನ್ನು ಕೋಮು ಹಿಂಸೆ ಪೀಡಿತ ಜಿಲ್ಲೆ ಎಂಬಂತೆ ರಾಷ್ಟ್ರಮಟ್ಟದಲ್ಲಿ ಬಿಂಬಿಸಲು ಕಾಂಗ್ರೆಸ್ ಸರ್ಕಾರ ಹುನ್ನಾರ ನಡೆಸುತ್ತಿದೆ.

ಕೋಮು ಸಂಘರ್ಷಕ್ಕೆ ಕಾರಣವಾಗಿರುವ ಕರಾವಳಿ ಜಿಲ್ಲೆಯಲ್ಲಿ ಅವ್ಯಾಹತವಾಗಿರುವ ನಡೆಯುತ್ತಿರುವ ಗೋವುಗಳ ಕಳ್ಳತನವನ್ನು ತಡೆಯಲು ಗೋ ಹಂತಕರ ವಿರುದ್ಧ ಗೋವು ಕಳ್ಳತನ ನಿಗ್ರಹ ವಿಶೇಷ ಕಾರ್ಯಪಡೆ ಯನ್ನು ರಾಜ್ಯ ಸರ್ಕಾರ ಆರಂಭಿಸಲಿ.

ಇದರಿಂದ ಜಿಲ್ಲೆಯ ಆರ್ಥಿಕ ವ್ಯವಸ್ಥೆಗೆ, ಶಿಕ್ಷಣ ಸಂಸ್ಥೆಗಳು, ಪ್ರವಾಸೋದ್ಯಮ, ಕೈಗಾರಿಕೆಗಳು, ಧಾರ್ಮಿಕ ಕೇಂದ್ರಗಳಿಗೆ ದೊಡ್ಡ ಹೊಡೆತ ನೀಡಲಿದೆ. ಉಡುಪಿ ಜಿಲ್ಲೆಯ ಹೊಟೇಲ್ ಉದ್ಯಮ, ರಿಯಲ್ ಎಸ್ಟೇಟ್, ಸಣ್ಣ ಕೈಗಾರಿಕೆ ಮೊದಲಾದ ಕ್ಷೇತ್ರದ ಉದ್ಯಮಗಳು ಆರ್ಥಿಕ ಹಿಂಜರಿತದ ಗಂಭೀರ ಸಮಸ್ಯೆ ಎದುರಿಸುವ ಸನ್ನಿವೇಶ ಸೃಷ್ಟಿಯಾಗಲಿದೆ.

ಜಿಲ್ಲೆಯಲ್ಲಿ ಹೂಡಿಕೆ ಮಾಡಲು ಮುಂದಾಗಿರುವ ಉದ್ಯಮಿಗಳು ಹಾಗೂ ಯುವ ಜನತೆಗೆ ಉದ್ಯೋಗಾವಕಾಶ ಸೃಷ್ಟಿಸಲಿರುವ ಐಟಿ ಬಿಟಿ ಕಂಪೆನಿಗಳು ಉಡುಪಿ ಜಿಲ್ಲೆಯನ್ನು ಕಡೆಗಣಿಸುವ ಸನ್ನಿವೇಶ ನಿರ್ಮಾಣವಾಗಲಿದೆ.

ರಾಜ್ಯ ಸರ್ಕಾರದ ಈ ರಾಜಕೀಯ ಪ್ರೇರಿತ ನಿರ್ಧಾರ ಶೈಕ್ಷಣಿಕ ಸಾಧನೆಯ ಜೊತೆ ಜೊತೆಗೆ ರಾಜ್ಯದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಜಿಲ್ಲೆಯ ಅಭಿವೃದ್ಧಿಗೆ ಕೊಡಲಿಯೇಟು ನೀಡಿದೆ.

ಉಡುಪಿ ಜಿಲ್ಲೆಯ 5 ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದು, ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡು ಹತಾಶಗೊಂಡಿರುವ ರಾಜ್ಯ ಸರ್ಕಾರ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡದೆ ನಿರಂತರವಾಗಿ ನಿರ್ಲಕ್ಷ್ಯ ಮಾಡುತ್ತಿದ್ದು, ಮತೀಯ ಶಕ್ತಿಗಳ ಒತ್ತಡಕ್ಕೆ ಮಣಿದು ಕೋಮು ಹಿಂಸೆ ನಿಗ್ರಹ ಪಡೆಯ ಮೂಲಕ ರಾಷ್ಟ್ರೀಯವಾದಿ ಚಿಂತನೆಯ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

ರಾಜ್ಯ ವಿಶೇಷ ಕಾರ್ಯಪಡೆಯ ವ್ಯಾಪ್ತಿಯಿಂದ ಉಡುಪಿ ಜಿಲ್ಲೆಯನ್ನು ತಕ್ಷಣ ಕೈಬಿಡ ಬೇಕು ಹಾಗೂ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹಾಗೂ ಅಭಿವೃದ್ದಿಯ ದೃಷ್ಟಿಯಿಂದ ವಿಶೇಷ ಕಾರ್ಯಪಡೆಯ ಔಚಿತ್ಯವನ್ನು ಪುನರ್ ವಿಮರ್ಶೆ ಮಾಡಿ ರದ್ದು ಮಾಡಬೇಕು.

ಉಡುಪಿಯ ಪ್ರಜ್ಞಾವಂತ ನಾಗರಿಕರು ಜಿಲ್ಲೆಯ ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಒಕ್ಕೊರಲಿನಿಂದ ವಿರೋಧಿಸಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಸಂದರ್ಭ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಡುಪಿ ಎಸ್ಪಿ ಡಾ. ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಹರಿರಾಂ ಶಂಕರ್….!!

 


ಉಡುಪಿ : ಉಡುಪಿ ಎಸ್.ಪಿ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ

ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಂ ಶಂಕರ್ ಅವರನ್ನು ನೇಮಿಸಿದೆ.

ಉಡುಪಿ ನಗರ ಪ್ರಾಧಿಕಾರದ ಕೃಷಿ ವಲಯ, ಅವೈಜ್ಞಾನಿಕ ಉದ್ದೇಶಿತ ರಸ್ತೆ ಸಹಿತ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಕರಡು ಅಧಿಸೂಚನೆ ಪ್ರಕಟ : ಯಶ್ಪಾಲ್ ಸುವರ್ಣ


ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಾಸವಿರುವ ಸಾರ್ವಜನಿಕರಿಗೆ ಮನೆ ನಿರ್ಮಾಣಕ್ಕೆ ಇದ್ದ ಹಲವಾರು ತೊಡಕುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ ಕರಡು ಅಧಿಸೂಚನೆಯನ್ನು ಹೊರಡಿಸಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಈ ಕರಡು ಅಧಿಸೂಚನೆಯಲ್ಲಿ ಕೃಷಿ ವಲಯದಲ್ಲಿ ಮನೆ ನಿರ್ಮಾಣದ ಉದ್ದೇಶಕ್ಕೆ ನಿಗದಿ ಪಡಿಸಿದ್ದ 11.1.2023 ರ ಗಡುವನ್ನು ರದ್ದುಪಡಿಸಿದ್ದು, ಅವೈಜ್ಞಾನಿಕ ಉದ್ದೇಶಿತ ರಸ್ತೆ, ಹೆಚ್.ಟಿ. ವಿದ್ಯುತ್ ಮಾರ್ಗ, ರೈಲು ಮಾರ್ಗ, ತೋಡು ಮತ್ತಿತರ ವಿಷಯಗಳಲ್ಲಿ ಝೋನಲ್ ರೆಗ್ಯುಲೇಷನ್ ನಲ್ಲಿ ವಾಸ್ತವಕ್ಕಿಂತ ಭಿನ್ನವಾಗಿ ನಮೂದಿಸಿದ ಅಂಶಗಳನ್ನು ಸರಿಪಡಿಸಲು ಹಾಗೂ ಸಾರ್ವಜನಿಕ ಅಥವಾ ಅರೆ ಸಾರ್ವಜನಿಕ ವಲಯವನ್ನಾಗಿ ತಪ್ಪಾಗಿ ಗುರುತಿಸಿರುವ ಸ್ಥಳಗಳ ಕ್ರಮಬದ್ಧ ಅವಕಾಶ ಕಲ್ಪಿಸಲಾಗಿದೆ.

ಉಡುಪಿ ನಗರ ಪ್ರಾಧಿಕಾರದ ವ್ಯಾಪ್ತಿಯಲ್ಲಿಯ ಹಲವಾರು ವರ್ಷಗಳಿಂದ ಮನೆ ನಿರ್ಮಾಣಕ್ಕೆ ತೊಡಕಾಗಿದ್ದ ಬಗ್ಗೆ ಈ ಹಿಂದೆ ನಗರಾಭಿವೃದ್ದಿ ಸಚಿವರು ಮತ್ತು ಅಧಿಕಾರಿಗಳಿಗೆ ಪತ್ರ ಬರೆದು ನಿಯಮಗಳನ್ನು ಸರಿಪಡಿಸುವಂತೆ ಮನವಿ ಮಾಡಿಕೊಂಡಿದ್ದು ಮತ್ತು ಹಿಂದಿನ ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಿ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿದ್ದು, ಇದೀಗ ನಗರಾಭಿವೃದ್ದಿ ಇಲಾಖೆ ನಮ್ಮ ಮನವಿಗೆ ಸ್ಪಂದಿಸಿ ಕರಡು ಅಧಿಸೂಚನೆ ಹೊರಡಿಸುವ ಮೂಲಕ ಸಮಸ್ಯೆಗೆ ಪರಿಹಾರ ಒದಗಿಸಿದೆ ಹಾಗೂ ಈ ಕರಡು ಅಧಿಸೂಚನೆ ಬಗ್ಗೆ ಸಾರ್ವಜನಿಕರು ತಮ್ಮ ಯಾವುದೇ ಸಲಹೆ ಸೂಚನೆಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮುಂದಿನ ೬ ದಿನಗಳ‌ ಕಾಲ ಭಾರೀ ಮಳೆ ಸಾಧ್ಯತೆ| ವಿವಿಧ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

 


ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ(ಮೇ 19) ಸತತವಾಗಿ ಆರು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ಬೀಸಲಿದ್ದು, ಬಹುತೇಕ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ.

ಮೇ 19ರಂದು ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೇ 20ರಂದು ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಕೊಪ್ಪಳ, ವಿಜಯಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೇ 21ರಿಂದ 24ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉಡುಪಿ ಎಸ್ಪಿ ಸಹಿತ ನಾಲ್ವರು ಪೊಲೀಸರಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’

ಉಡುಪಿ, ಮೇ 18: ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸರು ಭಾಜನರಾಗಿದ್ದಾರೆ.

ಮಲ್ಪೆ ಕರಾವಳಿ ಕಾವಲು ಪೊಲೀಸ್‌ನ ಎಸ್ಸೈ ವೈಲೆಟ್ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಗುರುದಾಸ್, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್ಮ್ಡ್ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಕೂಡ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಲ್ಪೆ - ಆದಿ ಉಡುಪಿ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

 


ಮಲ್ಪೆ ಆದಿ ಉಡುಪಿ ಹೆದ್ದಾರಿ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಲ್ಪೆ ಫಿಶರೀಶ್ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಮನವಿಯ ಮೇರೆಗೆ ಹೆದ್ದಾರಿ ಕಾಮಗಾರಿಗಾಗಿ ತೆರವು ಮಾಡಿರುವ ಶಾಲೆಯ ಆವರಣ ಗೋಡೆಯನ್ನು ಶಾಲೆಯ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ಮರು ನಿರ್ಮಾಣ ಮಾಡುವಂತೆ ರಾಷ್ಟೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಲ್ಪೆ ಎಳೂರು ಮೊಗವೀರ ಭವನದ ಬಳಿ ಈ ಹಿಂದೆ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಿದ್ದ ಬಸ್ಸು ನಿಲ್ದಾಣವನ್ನು ತೆರವು ಮಾಡಿದ್ದು, ಈಗ ಯಾವುದೇ ಬಸ್ ನಿಲ್ದಾಣವಿಲ್ಲದೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಬಿಸಿಲು ಗಾಳಿ ಮಳೆಗೆ ರಕ್ಷಣೆ ಇಲ್ಲದೆ ತೊಂದರೆ ಎದುರಿಸುತ್ತಿದ್ದು, ಬಾಕಿ ಉಳಿದಿರುವ ಮರವನ್ನು ತೆರವು ಮಾಡಿ ತಾತ್ಕಾಲಿಕ ಬಸ್ಸು ನಿಲ್ದಾಣ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಮುಂದಿನ ಹಂತದಲ್ಲಿ ಕಟ್ಟಡಗಳ ತೆರವು ಸಂದರ್ಭದಲ್ಲಿ ಕಟ್ಟಡಗಳ ಮಾಲೀಕರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಹಾಗೂ ಸಾರ್ವಜನಿಕರು ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಹಕಾರ ನೀಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಶ್ರೀ ಸುಂದರ ಕಲ್ಮಾಡಿ, ಶ್ರೀಮತಿ ಎಡ್ಲಿನ್ ಕರ್ಕಡ, ಶ್ರೀ ಶ್ರೀಶ ಕೊಡವೂರು, ಶ್ರೀಮತಿ ಲಕ್ಷ್ಮೀ ಮಂಜುನಾಥ, ರಾಷ್ಟೀಯ ಹೆದ್ದಾರಿ ಇಲಾಖೆಯ ಶ್ರೀ ಮಂಜುನಾಥ ನಾಯಕ್, ಗ್ರಾಮ ಆಡಳಿತಾಧಿಕಾರಿ ಶ್ರೀ ಕಾರ್ತಿಕೇಯ ಭಟ್, ಸ್ಥಳೀಯ ಮುಖಂಡರಾದ ಶ್ರೀ ಮಂಜು ಕೊಳ, ಶ್ರೀ ಸುರೇಶ್ ಕುಂದರ್, ಫೀಶರೀಶ್ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.





ಉಡುಪಿ: ಗಿರಿಜಾ ಸರ್ಜಿಕಲ್ಸ್ ವತಿಯಿಂದ ನರ್ಸಸ್ ಡೇ ಆಚರಣೆ


 ಉಡುಪಿ ಜಿಲ್ಲೆಯಲ್ಲಿ ನಿಸ್ವಾರ್ಥ ಸೇವೆ ನೀಡುತ್ತಿರುವ ದಾದಿಯರ (ನರ್ಸಸ್) ಹೆಮ್ಮೆಯ ಸೇವೆಯನ್ನು ಗುರುತಿಸಿ, ಅವರ ಪ್ರಯತ್ನಗಳಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಗಿರಿಜಾ ಸರ್ಜಿಕಲ್ಸ್ ಹಾಗೂ ಸೀನಿಯರ್ ಜೆಸಿಐ, ಟೆಂಪಲ್ ಸಿಟಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ ನಡೆಸಲಾಯಿತು.

ಕಾರ್ಯಕ್ರಮವು ಉಡುಪಿಯ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಭಾಂಗಣದಲ್ಲಿ ಜರುಗಿದ್ದು, ನರ್ಸಿಂಗ್ ವೃತ್ತಿಯ ಮಹತ್ವ, ದಾದಿಯರ ತ್ಯಾಗಮಯ ಜೀವನ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅವರ ಪಾತ್ರವನ್ನು ವಿಶೇಷವಾಗಿ ಪ್ರತಿಪಾದಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಸರ್ಜನ್ ಡಾ. ಅಶೋಕ್, ಆಸ್ಪತ್ರೆಯ RMO ಡಾ. ವಾಸುದೇವ, ಸೀನಿಯರ್ ಜೆಸಿಐ ಅಧ್ಯಕ್ಷ ಶ್ರೀ ಶಿವಾನಂದ ಶೆಟ್ಟಿಗಾರ್, ಹಾಗೂ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್‌ನ ಮ್ಯಾನೇಜಿಂಗ್ ಡೈರೆಕ್ಟರ್ ರವೀಂದ್ರ ಶೆಟ್ಟಿ ಕಡೆಕಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ದಾದಿಯರಿಗೆ ಪ್ರಾಮುಖ್ಯತೆ ನೀಡುವ ಬಗ್ಗೆ ಮಾತನಾಡಿದರು.

ಹಿರಿಯ ಐದು ಮಂದಿ ದಾದಿಯರನ್ನು ವಿಶೇಷವಾಗಿ ಸನ್ಮಾನಿಸಲಾಗಿದ್ದು, ಉಳಿದ ಎಲ್ಲಾ ನರ್ಸಿಂಗ್ ಸಿಬ್ಬಂದಿಯ ಸೇವೆಗೂ ಗೌರವಪೂರ್ವಕ ಕೃತಜ್ಞತೆ ಸಲ್ಲಿಸಲಾಯಿತು. ಆಸ್ಪತ್ರೆಯ ನರ್ಸಿಂಗ್ ಸುಪರಿಂಟೆಂಡೆಂಟ್ ರತ್ನವತಿ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದರು.

ಇದೇ ಸಂದರ್ಭದಲ್ಲಿ ಸೀನಿಯರ್ ಜೆಸಿಐ ಸದಸ್ಯರು, ಗಿರಿಜಾ ಸರ್ಜಿಕಲ್ಸ್ ನ ಸಿಬ್ಬಂದಿ ವರ್ಗ, ಹಾಗೂ ಹಲವಾರು ಆರೋಗ್ಯ ಸೇವಾ ತಜ್ಞರು ಹಾಜರಿದ್ದರು.

ಗಿರಿಜಾ ಸರ್ಜಿಕಲ್ಸ್ ಸಂಸ್ಥೆಯು ಉಡುಪಿಯ ಹೊರತಾಗಿಯೂ ಕುಂದಾಪುರ ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಕೂಡ ನರ್ಸಸ್ ಡೇ ಕಾರ್ಯಕ್ರಮಗಳನ್ನು ಆಯೋಜಿಸಿ, ಸ್ಥಳೀಯ ದಾದಿಯರ ಸೇವೆಗೆ ಗೌರವ ಸಲ್ಲಿಸಿದೆ.

ಈ ಪ್ರಯತ್ನವು ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ದಾದಿಯರಲ್ಲಿ ಹೊಸ ಉತ್ಸಾಹವನ್ನು ತುಂಬಿದ್ದು, ನರ್ಸಿಂಗ್ ವೃತ್ತಿಗೆ ಹೆಚ್ಚಿನ ಮಾನ್ಯತೆ ನೀಡುವತ್ತ ಗಮನ ಸೆಳೆಯುತ್ತಿದೆ.








ಉಡುಪಿ: ಕುಡಿದ ಮತ್ತಿನಲ್ಲಿ ಮನೆಗೆ ಬೆಂಕಿಯಿಟ್ಟ ವ್ಯಕ್ತಿ..!

 


ಉಡುಪಿ,ಮೇ.11: ಅತಿಮಧ್ಯ ಸೇವನೆಯಿಂದ ಅಮಲೇರಿದ ಕುಡುಕನೊಬ್ಬ, ತ‌ನ್ನದೆ ಮನೆಗೆ ಬೆಂಕಿ‌ ಹಿಡಿಸಿರುವ ಘಟನೆಯು, ನಗರದ ಹೊರವಲಯದ ಚಿಟ್ಪಾಡಿಯಲ್ಲಿ ರವಿವಾರ ನಡೆದಿದೆ.

ಕುಡುಕನ ರಂಪಾಟ, ಉಗ್ರ ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ‌ ಒಳಕಾಡುವರಲ್ಲಿ ನೆರವಿಗೆ ಬರುವಂತೆ ಹೇಳಿಕೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಒಳಕಾಡುವರು ಅಗ್ನಿಶಾಮಕ ದಳದವರಿಗೆ ವಿಷಯ ಮುಟ್ಟಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ದೊಡ್ಡ ಪ್ರಮಾಣದಲ್ಲಿ ಆಗಬಹುದಾದ ಅಗ್ನಿದುರಂತವನ್ನು ತಪ್ಪಿಸಿದ್ದಾರೆ. ಬಳಿಕ ಒಳಕಾಡುವರು ಕುಡುಕನ‌‌ ಮೊನವೊಲಿಸಿ ಮಧ್ಯವರ್ಜನ‌ ಕೇಂದ್ರಕ್ಕೆ ದಾಖಲುಪಡಿಸಿದ್ದಾರೆ.

© all rights reserved
made with by templateszoo