ಇಂದ್ರಾಳಿ ರೈಲ್ವೇ ಮೇಲ್ಸುತುವೆ ಕಾಮಗಾರಿಯನ್ನು ಗುತ್ತಿಗೆದಾರರು ಗಂಭೀರವಾಗಿ ಪರಿಗಣಿಸಿ, ಕಾಮಗಾರಿಯ ವೇಗವನ್ನು ಹೆಚ್ಚಿಸಿ ಶೀಘ್ರದಲ್ಲೇ ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಕಾನೂನು ರೀತಿಯಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಸಂಬಂಧಿತರಿಗೆ ಸ್ಪಷ್ಟ ಎಚ್ಚರಿಕೆಯನ್ನು ನೀಡಿದ್ದಾರೆ.
ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಳ ಪ್ರಗತಿ ಕುರಿತಂತೆ ಚರ್ಚಿಸಲು ಶುಕ್ರವಾರ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಸೇತುವೆ ಕಾಮಗಾರಿ 2018ರಿಂದಲೇ ಪ್ರಾರಂಭಗೊಂಡಿದ್ದರೂ, ಈವರೆಗೆ ಪೂರ್ಣಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುವುದರ ಜೊತೆಗೆ ಅನೇಕ ಅಪಘಾತಗಳು, ಸಾವು ನೋವುಗಳು ಸಂಭವಿಸುತ್ತಿವೆ. ಸಾರ್ವಜನಿಕರು ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇವೆಲ್ಲವುಗಳಿಗೂ ಜಿಲ್ಲಾಡಳಿತ ಉತ್ತರ ನೀಡಬೇಕು ಎಂದವರು ಕಟುವಾಗಿ ನುಡಿದರು.
ಆದರೆ, ಕಾಮಗಾರಿಯ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ. ಕಳೆದ ಆರು ತಿಂಗಳಿನಿಂದ ನಾವು ನಿರಂತರವಾಗಿ ಸಭೆ ಹಾಗೂ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ನಡೆಸುತ್ತಿದ್ದೇವೆ. ಆದರೂ ಸಹ ಕಾಮಗಾರಿಗೆ ವೇಗ ಸಿಕ್ಕಿಲ್ಲ. ಅಭಿಯಂತರರು ಹಾಗೂ ಗುತ್ತಿಗೆದಾರರು ಈ ಎಲ್ಲವನ್ನು ಗಂಭೀರವಾಗಿ ಪರಿಗಣಿಸುವಂತೆ ಕಾಣುತ್ತಿಲ್ಲ. ಕಾಮಗಾರಿಯ ಪ್ರಗತಿಯ ವೇಗವನ್ನು ಹೆಚ್ಚಿಸಿ ಶೀಘ್ರವೇ ಅದನ್ನು ಪೂರ್ಣಗೊಳಿಸಬೇಕು ಅವರು ಕಟು ಎಚ್ಚರಿಕೆ ನೀಡಿದರು.
ಈಗಾಗಲೇ ಕಬ್ಬಿಣದ ಗರ್ಡರ್ಗಳ ಫ್ಯಾಬ್ರಿಕೇಷನ್ ವರ್ಕ್ಸ್ ಪೂರ್ಣ ಗೊಂಡಿದೆ. ಇವುಗಳ ಇನ್ಸ್ಫೆಕ್ಷನ್ ಕಾರ್ಯಗಳನ್ನು ರೈಲ್ವೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಜಂಟಿಯಾಗಿ ಕೈಗೊಂಡು ಗುಣಮಟ್ಟ ವನ್ನು ಪರೀಕ್ಷಿಸಬೇಕು ಎಂದ ಜಿಲ್ಲಾಧಿಕಾರಿ, ಕಬ್ಬಿಣದ ಗರ್ಡಲ್ಸ್ ಅನ್ನು ಸೇತುವೆಯಾಗಿ ಅಳವಡಿಸಲು ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ತಯಾರಿಗಳನ್ನು ಈಗಿನಿಂದಲೇ ಜೊತೆ ಜೊತೆ ಯಾಗಿ ಕೈಗೊಳ್ಳಬೇಕೆಂದು ಅವರು ಇಂಜಿನಿಯರ್ಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಸದ್ಯ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗು ತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ ಕುಂಠಿತ ಗೊಳ್ಳು ತ್ತಿದೆ. ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ 169 ಎಯ ಕರಾವಳಿ ಬೈಪಾಸ್ನಿಂದ ಮಲ್ಪೆವರೆಗಿನ ರಸ್ತೆ ಕಾಮಗಾರಿಗೆ ಅಗತ್ಯವಿ ರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣ ಪ್ರಮಾಣದಲ್ಲಿ ತ್ವರಿತವಾಗಿ ಕೈಗೊಳ್ಳಬೇಕು. ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಬೇಕು. ಆಸ್ತಿಯ ಮಾಲಕರು ಇದಕ್ಕೆ ಸಹಕರಿ ಸಬೇಕು. ಭೂಸ್ವಾಧೀನ ಹಣವನ್ನು ಮುಂಚಿತವಾಗಿಯೇ ಠೇವಣಿ ಇಡಬೇಕು ಎಂದ ಅವರು, ಕಾಮಗಾರಿ ಕೈಗೊಳ್ಳುವಲ್ಲಿ ಯಾವುದೇ ರೀತಿಯ ಅಡಚಣೆಗಳು ಉಂಟಾದಲ್ಲಿ ಪೊಲೀಸ್ ಇಲಾಖೆಯ ನೆರವು ಪಡೆಯು ವಂತೆ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ-66ರ ಸಂತೆಕಟ್ಟೆ-ಅಂಬಲಪಾಡಿಯ ಅಂಡರ್ಪಾಸ್ ಕಾಮಗಾರಿಯನ್ನು ಇನ್ನೂ ಒಂದು ತಿಂಗಳ ಒಳಗೆ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಮಳೆಗಾಲ ಪ್ರಾರಂಭವಾಗಿ ಕಾಮಗಾರಿಗೆ ಅಡಚಣೆಗಳು ಉಂಟಾಗುವ ಸಾಧ್ಯತೆ ಇರುತ್ತದೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಸಹಾಯಕ ಕಮಿಷನರ್ ಮಹೇಶ್ಚಂದ್ರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಶೃಂಗೇರಿ-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್ ಹಾಗೂ ಇತರರು ಉಪಸ್ಥಿತರಿದ್ದರು.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ